ತಮಿಳುನಾಡಿಗೆ ಹೆಚ್ಚುವರಿ ನೀರು: ಆದೇಶ ಅವೈಜ್ಞಾನಿಕ ಎಂದ ಎಚ್.ಡಿ. ಕುಮಾರಸ್ವಾಮಿ
ಹಾಸನ: ತಮಿಳುನಾಡಿಗೆ ದಿನಕ್ಕೆ 3,500 ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ ನೀಡಿರುವ ಆದೇಶ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಕೈಕೊಟ್ಟರೆ ಕರ್ನಾಟಕದ ರೈತರು ಹಾಗೂ ಜನತೆ ಗಂಭೀರ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.ಬುಧವಾರ ಸುದ್ದಿಗಾರರೊಂ

ಹಾಸನ: ತಮಿಳುನಾಡಿಗೆ ದಿನಕ್ಕೆ 3,500 ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ ನೀಡಿರುವ ಆದೇಶ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಮಳೆ ಕೈಕೊಟ್ಟರೆ ಕರ್ನಾಟಕದ ರೈತರು ಹಾಗೂ ಜನತೆ ಗಂಭೀರ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರು ಬಿಡುಗಡೆಗೆ ನೀಡಿರುವ ಆದೇಶ ಅವೈಜ್ಞಾನಿಕವಾಗಿದ್ದು, ರಾಜ್ಯದ ಪಾಲಿಗೆ ಮರಣ ಶಾಸನವಾಗಿದೆ. ರಾಜ್ಯದ ರೈತರು ಮತ್ತು ಜನರ ಹಿತಕ್ಕೆ ಮಾರಕವಾಗಲಿದೆ. ಈ ನಿರ್ಧಾರದ ವಿರುದ್ಧ ಎಲ್ಲ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ರಾಜ್ಯದ ಜನತೆ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕಾಗಿದೆ ಎಂದು ಹೇಳಿದರು.ನ್ಯಾಯಮಂಡಳಿಯ ಆದೇಶಗಳ ಮೂಲಕ ಕರ್ನಾಟಕದ ಮೇಲೆ ನಿರಂತರ ಒತ್ತಡ ತರಲಾಗುತ್ತಿದೆ. ಆದರೆ ರಾಜ್ಯದ ವಾಸ್ತವ ಪರಿಸ್ಥಿತಿ, ಬರದ ತೀವ್ರತೆ ಮತ್ತು ರೈತರ ಸಂಕಷ್ಟವನ್ನು ಸಮರ್ಪಕವಾಗಿ ಪರಿಗಣಿಸಲಾಗುತ್ತಿಲ್ಲ ಎಂದರು.‘ನಮ್ಮ ಅಧಿಕಾರಿಗಳು ಅಥವಾ ವಕೀಲರು ಸರಿಯಾಗಿ ವಾದಮಂಡಿಸಲಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ಹಲವು ದಶಕಗಳ ಅನುಭವ ಗಮನದಲ್ಲಿ ಇಟ್ಟುಕೊಂಡು ಭವಿಷ್ಯದ ಜಲ ನಿರ್ವಹಣೆಗೆ ವೈಜ್ಞಾನಿಕ ಯೋಜನೆ ರೂಪಿಸುವಲ್ಲಿ ನಾವು ಕೆಲವೊಂದು ತಪ್ಪು ಮಾಡಿದ್ದೇವೆ. ಅವುಗಳನ್ನು ಈಗಲೇ ಸರಿಪಡಿಸಿಕೊಳ್ಳಬೇಕಾಗಿದೆ’ ಎಂದರು.ಕಳೆದ ವರ್ಷ ಉತ್ತಮ ಮಳೆಯಾಗಿದ್ದು, ಕೆಆರ್ಎಸ್ ಸೇರಿ ಪ್ರಮುಖ ಜಲಾಶಯಗಳು ಮೂರು ಬಾರಿ ಭರ್ತಿಯಾಗಿದ್ದವು. ಆ ಸಮಯದಲ್ಲಿ ರಾಜ್ಯದ ಕೆರೆ–ಕಟ್ಟೆಗಳನ್ನು ತುಂಬಿಸಲು ನೀರಾವರಿ ಇಲಾಖೆ ಮತ್ತು ಸರ್ಕಾರ ಕ್ರಮ ಕೈಗೊಂಡಿದ್ದರೆ, ಹೆಚ್ಚಿನ ಪ್ರಮಾಣದ ನೀರು ಸಂಗ್ರಹಿಸಬಹುದಾಗಿತ್ತು ಎಂದು ಹೇಳಿದರು.ಮುಂದಿನ ದಿನಗಳಲ್ಲಿ ನೀರು ವ್ಯರ್ಥವಾಗಿ ಸಮುದ್ರ ಸೇರುವುದನ್ನು ತಡೆಯುವ ರೀತಿಯಲ್ಲಿ ದೀರ್ಘಾವಧಿ ಯೋಜನೆ ರೂಪಿಸಬೇಕು. ಬರಗಾಲದಂತಹ ಪರಿಸ್ಥಿತಿ ಮರುಕಳಿಸಿದಾಗ ರೈತರು ಮತ್ತು ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕದಂತೆ ಜಲಸಂಗ್ರಹ, ಕೆರೆಗಳ ಪುನಶ್ಚೇತನ ಹಾಗೂ ಸಮಗ್ರ ಜಲ ನಿರ್ವಹಣೆಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.