ಉತ್ತರ ಕನ್ನಡ ಜಿಲ್ಲೆಗೆ ಸಿಗದ ಸಚಿವ ಸ್ಥಾನ; ಯುವ ಕಾಂಗ್ರೆಸ್ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ
– ಯುವ ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದೇನು? ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಕಾರವಾರ-ಅಂಕೋಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಯನ್ನು ಜಿಲ್ಲಾ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಿಗೆ ನೀಡಿದ್ದಾರೆ. ನಾಲ್ಕು ಜನ ಕಾಂಗ್ರೆಸ್ ಶಾಸಕರಿದ್ದರೂ ಯಾರೊಬ್ಬರಿಗೂ ಸಚಿವ ಸ್ಥಾನ ನೀಡದೇ ಹೈಕಮಾ

– ಯುವ ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದೇನು? ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಕಾರವಾರ-ಅಂಕೋಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಯನ್ನು ಜಿಲ್ಲಾ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಿಗೆ ನೀಡಿದ್ದಾರೆ. ನಾಲ್ಕು ಜನ ಕಾಂಗ್ರೆಸ್ ಶಾಸಕರಿದ್ದರೂ ಯಾರೊಬ್ಬರಿಗೂ ಸಚಿವ ಸ್ಥಾನ ನೀಡದೇ ಹೈಕಮಾಂಡ್ ನಿರ್ಲಕ್ಷ್ಯ ಮಾಡಿದೆ. ಕಾರವಾರದ ಶಾಸಕ ಸತೀಶ್ ಸೈಲ್ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ಆಸೆ ಹೊಂದಿದ್ದೆವು. ಭಟ್ಕಳ ಶಾಸಕ ಮಂಕಾಳು ವೈದ್ಯ, ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆಯಂತಹ ನಾಯಕರಿದ್ದಾರೆ. ಜಿಲ್ಲೆಯಲ್ಲಿ ಆರರ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದೂ, ನಿರ್ಲಕ್ಷ್ಯ ಮಾಡಿರುವುದಕ್ಕೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ನನಗೆ ಕರೆದು ಸಚಿವ ಸ್ಥಾನ ಕೊಟ್ಟರು: ಹೆಚ್ಡಿಕೆ ಪರ ಬ್ಯಾಟ್ ಬೀಸಿದ ಶ್ರೀನಿವಾಸ್ ಯುವ ಕಾಂಗ್ರೆಸ್ ತಾಲೂಕು ಪದಾಧಿಕಾರಿಗಳ ಪ್ರಕಟಣೆಯಲ್ಲಿ ಏನಿದೆ? ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು ಆರು ವಿಧಾನಸಭಾ ಕ್ಷೇತ್ರಗಳಿದ್ದು, ಅವುಗಳಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಜಿಲ್ಲೆಯಲ್ಲಿ ಪಕ್ಷಕ್ಕೆ ಆನೆಬಲ ತಂದುಕೊಟ್ಟಿದ್ದಾರೆ. ಶಾಸಕರಾದ ಸತೀಶ್ ಸೈಲ್, ಮಂಕಾಳ ವೈದ್ಯ, ಆರ್.ವಿ. ದೇಶಪಾಂಡೆ ಹಾಗೂ ಭೀಮಣ್ಣ ನಾಯ್ಕ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ, ನೂತನ ಸಚಿವ ಸಂಪುಟ ರಚನೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಮರ್ಪಕ ಪ್ರಾತಿನಿಧ್ಯ ದೊರೆಯದೇ, ಜಿಲ್ಲೆಯ ಯಾವುದೇ ಕಾಂಗ್ರೆಸ್ ಶಾಸಕರಿಗೂ ಸಚಿವ ಸ್ಥಾನ ನೀಡದಿರುವುದು ನಮಗೆಲ್ಲ ತೀವ್ರ ನೋವು ಹಾಗೂ ಅಸಮಾಧಾನ ಉಂಟುಮಾಡಿದೆ. ಕಾರವಾರ–ಅಂಕೋಲಾ ಕ್ಷೇತ್ರದ ಜನಪ್ರಿಯ ಶಾಸಕ ಸತೀಶ್ ಸೈಲ್ ಅವರಿಗೆ ಸಚಿವ ಸ್ಥಾನ ದೊರೆಯದಿರುವುದು ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ. ನಾವು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷದ ತತ್ವ, ಸಿದ್ಧಾಂತ ಮತ್ತು ನಾಯಕತ್ವವನ್ನು ಬೆಂಬಲಿಸಿ ಹಗಲಿರುಳು ಸೇವೆ ಸಲ್ಲಿಸಿದ್ದೇವೆ. ಆದರೆ, ನಮ್ಮ ನಿಷ್ಠೆ ಹಾಗೂ ಭಾವನೆಗಳಿಗೆ ಸೂಕ್ತ ಗೌರವ ಮತ್ತು ಮಾನ್ಯತೆ ದೊರೆಯದ ಹಿನ್ನೆಲೆಯಲ್ಲಿ ನಾವು ತೀವ್ರ ಬೇಸರಗೊಂಡಿದ್ದೇವೆ. ಆದ್ದರಿಂದ, ಪಕ್ಷದ ಈ ನಿರ್ಧಾರದ ವಿರುದ್ಧ ನಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವ ಸಲುವಾಗಿ, ಕಾರವಾರ–ಅಂಕೋಲಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ನ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ತಮ್ಮ ಹುದ್ದೆಗಳಿಗೆ ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇವೆ ಎಂದು ಪ್ರಕಣೆಯಲ್ಲಿ ತಿಳಿಸಿದ್ದಾರೆ. ರಾಜೀನಾಮೆ ಸಲ್ಲಿಸಿದ ಯುವ ಕಾಂಗ್ರೆಸ್ ಸಮಿತಿಯ ಪ್ರಮುಖ ಪದಾಧಿಕಾರಿಗಳು ನೂತನ ಜೈನ – ಅಧ್ಯಕ್ಷರು, ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ದರ್ಶನ್ ನಾಯ್ಕ್ – ಉಪಾಧ್ಯಕ್ಷರು ಅಭಿಷೇಕ್ ರಾಣೆ – ಅಧ್ಯಕ್ಷರು, ಕಾರವಾರ ಬ್ಲಾಕ್ ಯುವ ಕಾಂಗ್ರೆಸ್ ಇತರೆ ಪದಾಧಿಕಾರಿಗಳು: ನಾಗರಾಜ್ ಪಡ್ತಿ, ಅಭಿನಂದನ್ ಬಾಡಕರ್, ವಿಶಾಲ್, ಸೋಮು, ಗೌರೀಶ್, ರಾಹುಲ್, ಮಯೂರ್, ವೈಭವ, ಸೂರಜ್ ಹಾಗೂ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಎಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು. ಇದನ್ನೂ ಓದಿ: ರಾಜೀನಾಮೆ ಹಿಂಪಡೆದ ಯಶವಂತರಾಯ ಗೌಡ ಪಾಟೀಲ್ ಶಾಕ್ ನೀಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರ ಹೇಳಿಕೆ ಕಾರವಾರ-ಅಂಕೋಲ ಯುವ ಕಾಂಗ್ರೆಸ್ ಪದಾಧಿಕಾರಿಗಳು ರಾಜೀನಾಮೆ ನೀಡಿರುವ ಕುರಿತು ಮಾಧ್ಯಮಕ್ಕೆ ಹೇಳಿಕೆ ನೀಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಮೋದ್ ಶಿರಸಿಕರ್ (ಸುಬ್ರಹ್ಮಣ್ಯ ಶಿರಸಿಕರ್ ) ಅವರು ವಾಟ್ಸಾಪ್ (whatsapp)ನಲ್ಲಿ ರಾಜೀನಾಮೆ ಪ್ರತಿ ನೀಡಿದ್ದಾರೆ. ಅಧಿಕೃತವಾಗಿ ಹೇಳುವುದು, ಕೇಳುವುದು ಏನೂ ಮಾಡಿಲ್ಲ. ಆದರೆ, ಈ ಎಲ್ಲಾ ಪದಾಧಿಕಾರಿಗಳು ಸಕ್ರಿಯವಾಗಿ ಚಟುವಟಿಕೆಯಲ್ಲಿ ಇಲ್ಲದ ಕಾರಣ ಕೆಲವು ದಿನದ ಹಿಂದೆಯೇ ಅವರನ್ನು ಪದಾಧಿಕಾರಿಗಳ ಹುದ್ದೆಯಿಂದ ತೆಗೆಯುವುದಾಗಿ ಅವರಿಗೆ ಹೇಳಿದ್ದೆವು. ನಾಳೆ ಕಾರವಾರದಲ್ಲೇ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಕಾರ್ಯಕಾರಿಣಿ ನಡೆಯುವುದು ಇತ್ತು. ಕಾರ್ಯಕಾರಿಣಿ ವೇಳೆ ಅವರನ್ನು ಹುದ್ದೆಯಿಂದ ಸಸ್ಪೆಂಡ್ ಮಾಡುವುದು ಇತ್ತು. ಕಾರಣ ಎಲೆಕ್ಷನ್ ಮುಗಿದ ಒಂದೂವರೆ ವರ್ಷದಿಂದ ಅವರ ಕಾರ್ಯಚಟುವಟಿಕೆ ಜೀರೋ. ಯಾವ ಸಭೆಗೂ ಹಾಜರಾಗಿಲ್ಲ. ಮೂರು ಮೀಟಿಂಗ್ ಮಾಡಿದ್ದರೂ ಹಾಜರಾಗದ ಕಾರಣ ಅವರನ್ನು ಸಸ್ಪೆಂಡ್ ಮಾಡುವುದು ಇತ್ತು. ನಿನ್ನೆ ಅವರಿಗೆ ತಿಳಿಸಿದ್ದೆವು. ಆದರೆ, ಇಂದು ಹೀಗೆ ಮಾಡಿದ್ದಾರೆ ಅಷ್ಟೆ ಎಂದು ಹೇಳಿಕೆ ನೀಡಿದ್ದಾರೆ.