ರಾಯಚೂರು|ಹೆದ್ದಾರಿ ಕಾಮಗಾರಿ ವಿಳಂಬ: ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಸಂಸದರ ಸೂಚನೆ
ರಾಯಚೂರು: ‘ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕೈಗೆತ್ತಿಕೊಂಡಿರುವ ವಿವಿಧ ಹೆದ್ದಾರಿ ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಂಸದ ಜಿ.ಕುಮಾರ ನಾಯಕ ಸೂಚಿಸಿದರು.ಇಲ್ಲಿಯ ಸಂಸದರ ಕಾರ್ಯಾಲಯದಲ್ಲಿ ಶನಿವಾರ ಎನ್ಎಚ್ಎಐ ಅಧಿಕಾರಿಗಳೊಂದಿಗೆ ಸಭೆ ನಡೆಸಿ

ರಾಯಚೂರು: ‘ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕೈಗೆತ್ತಿಕೊಂಡಿರುವ ವಿವಿಧ ಹೆದ್ದಾರಿ ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಂಸದ ಜಿ.ಕುಮಾರ ನಾಯಕ ಸೂಚಿಸಿದರು.ಇಲ್ಲಿಯ ಸಂಸದರ ಕಾರ್ಯಾಲಯದಲ್ಲಿ ಶನಿವಾರ ಎನ್ಎಚ್ಎಐ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.‘ಕಾಮಗಾರಿ ಪ್ರಾರಂಭವಾಗಿ ಹಲವು ವರ್ಷಗಳು ಕಳೆದಿದ್ದರೂ ಇನ್ನೂ ಪೂರ್ಣಗೊಳ್ಳದಿರುವುದಿರುವುದು ಸರಿಯಲ್ಲ’ ಎಂದು ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘ಸಾರ್ವಜನಿಕರು ಹಾಗೂ ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಾಮಗಾರಿಗಳು ವಿಳಂಬವಾಗದಂತೆ ನೋಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.‘ಹೆದ್ದಾರಿ ಕಾಮಗಾರಿಗಳ ಸಂದರ್ಭದಲ್ಲಿ ಸ್ಥಳೀಯರಿಗೆ ಹಾಗೂ ರೈತರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಲು ಅಗತ್ಯವಿರುವ ಕಡೆಗಳಲ್ಲಿ ಸರ್ವಿಸ್ ರಸ್ತೆ, ಅಂಡರ್ಪಾಸ್ ಹಾಗೂ ಸುರಕ್ಷಿತ ಸಂಪರ್ಕ ಮಾರ್ಗಗಳನ್ನು ಕಲ್ಪಿಸಬೇಕು ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ‘ರೈತರು ತಮ್ಮ ಜಮೀನುಗಳಿಗೆ ಸುಲಭವಾಗಿ ತೆರಳಲು ಹಾಗೂ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯಗಳನ್ನು ಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.‘ಹೆದ್ದಾರಿ ಕಾಮಗಾರಿಗಳಿಂದಾಗಿ ಗ್ರಾಮೀಣ ಪ್ರದೇಶಗಳ ಸಂಪರ್ಕ ಕಡಿತಗೊಳ್ಳದಂತೆ ಸ್ಥಳೀಯ ಅಗತ್ಯತೆಗಳನ್ನು ಪರಿಗಣಿಸಬೇಕು. ಶಾಲೆಗಳು, ಗ್ರಾಮಗಳು, ಕೃಷಿ ಜಮೀನುಗಳು ಹಾಗೂ ಪ್ರಮುಖ ಸಂಪರ್ಕ ಸ್ಥಳಗಳ ಬಳಿ ಸಾರ್ವಜನಿಕರ ಸುರಕ್ಷತೆಗೆ ಅಗತ್ಯವಿರುವ ಅಂಡರ್ಪಾಸ್ ಮತ್ತು ಇತರೆ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸಬೇಕು’ ಎಂದರು.‘ಕಾಮಗಾರಿಗಳಲ್ಲಿ ಎದುರಾಗಿರುವ ತಾಂತ್ರಿಕ ಹಾಗೂ ಭೂಸ್ವಾಧೀನ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೆ ಅವುಗಳನ್ನು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತ್ವರಿತವಾಗಿ ಪರಿಹರಿಸಬೇಕು. ಕಾಮಗಾರಿಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಿ, ವಿಳಂಬವಾಗದಂತೆ ಕಾರ್ಯಯೋಜನೆ ರೂಪಿಸಬೇಕು’ ಎಂದು ಸಂಸದರು ಸೂಚಿಸಿದರು.ಭಾರತಮಾಲಾ ಯೋಜನೆಯ ಪ್ಯಾಕೇಜ್–3 ಮತ್ತು 4 ಹಾಗೂ ಹುನುಗುಂದ–ರಾಯಚೂರು ಚತುಷ್ಪಥ ಹೆದ್ದಾರಿ ಪ್ಯಾಕೇಜ್–5 ಮತ್ತು 6 ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ, ಮುಖ್ಯ ಎಂಜಿನಿಯರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.